ಬೆಳ್ತಂಗಡಿ: ಬಳ್ಳಮಂಜ–ಪಣಕಜೆ ರಸ್ತೆಯ ಪಾಲ್ಯರ ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಕ್ಟಿವಾ ಸ್ಕೂಟರ್ನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.ಮೃತರನ್ನು ಆಕ್ಟಿವಾ ಸವಾರ ಡಾಕಯ್ಯ ಗೌಡ ಹಾಗೂ ಹಿಂಬದಿ ಸವಾರ ಚಂದಪ್ಪ ಮೂಲ್ಯ ಎಂದು ಗುರುತಿಸಲಾಗಿದೆ. ಪಿಕಪ್ ವಾಹನ ಮತ್ತು ಸ್ಕೂಟರ್ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ.ವಾಹನವು ಬಳ್ಳಮಂಜ ಕಡೆಯಿಂದ ಪಣಕಜೆ ಕಡೆಗೆ ವೇಗವಾಗಿ ಸಾಗುತ್ತಿತ್ತು. ಇದೇ ವೇಳೆ ಪಣಕಜೆಯಿಂದ ಬಳ್ಳಮಂಜ ಕಡೆಗೆ ಬರುತ್ತಿದ್ದ ಆಕ್ಟಿವಾ ಸ್ಕೂಟರ್ಗೆ ಪಾಲ್ಯರ ಸಮೀಪ ಪಿಕಪ್ ವಾಹನವು ನಿಯಂತ್ರಣ ತಪ್ಪಿ ನೇರವಾಗಿ ಮುಖಾಮುಖಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ಭೀಕರತೆಗೆ ಸ್ಕೂಟರ್ ಸಂಪೂರ್ಣವಾಗಿ ಜಖಂಗೊಂಡಿದ್ದು, ಹಿಂಬದಿ ಸವಾರ ಚಂದಪ್ಪ ಮೂಲ್ಯ ಅವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.ಇದೇ ಅಪಘಾತದಲ್ಲಿ ಸ್ಕೂಟರ್ ಚಲಾಯಿಸುತ್ತಿದ್ದ ಡಾಕಯ್ಯ ಗೌಡ ಅವರ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ತಕ್ಷಣವೇ ಸ್ಥಳೀಯರು ಮತ್ತು ಹಾದಿಹೋಕರು ಸೇರಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಿದ್ದಾರಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಬೆಳ್ತಂಗಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಸದ್ಯ ಪಿಕಪ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ತನಿಖೆ ಕೈಗೊಂಡಿದ್ದಾರೆ.
