ಪುತ್ತೂರು: ನಗರದ ದರ್ಬೆಯಲ್ಲಿರುವ ‘ಡ್ರೀಮ್ ಡೆಸ್ಟಿನೇಷನ್’ ಜನಸೇವಾ ಕೇಂದ್ರದಲ್ಲಿ ದಾಖಲಾತಿ ಲ್ಯಾಮಿನೇಷನ್ ವಿಚಾರವಾಗಿ ಶುರುವಾದ ಕ್ಷುಲ್ಲಕ ಕಾರಣದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಗಸ್ಟ್ 21ರಂದು ಮಧ್ಯಾಹ್ನ ಸುಳ್ಯ ಜಾಲ್ಸೂರು ನಿವಾಸಿ ಫಾತಿಮತ್ ಮಿಸ್ವಾನ (32) ಎಂಬವರು ತಮ್ಮ ಸಹೋದರ ಹಾಗೂ ತಂಗಿಯೊಂದಿಗೆ ದಾಖಲೆಗಳ ಪ್ರಿಂಟ್ ಮತ್ತು ಲ್ಯಾಮಿನೇಷನ್ಗಾಗಿ ದರ್ಬೆಯ ಜನಸೇವಾ ಕೇಂದ್ರಕ್ಕೆ ತೆರಳಿದ್ದರು. ಈ ವೇಳೆ ತಾಂತ್ರಿಕ ದೋಷದಿಂದಾಗಿ ಒಂದು ದಾಖಲೆ ಹಾಳಾಗಿದ್ದು, ಇದಕ್ಕೆ ಪರಿಹಾರವಾಗಿ ದಾಖಲೆಯನ್ನು ಸರಿಪಡಿಸಿಕೊಡುವಂತೆ ಅಥವಾ ಹೊಸ ದಾಖಲೆಗೆ ಬೇಕಾಗುವ ₹300 ನೀಡುವಂತೆ ಮಿಸ್ವಾನ ಕೇಳಿದ್ದಾರೆ. ಈ ವಿಚಾರದಲ್ಲಿ ಅಂಗಡಿಯಲ್ಲಿದ್ದ ಸುದರ್ಶನ ಪೈ ಮತ್ತು ಅಂಜನಾ ಪೈ ಆಕ್ಷೇಪ ವ್ಯಕ್ತಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಗಾಯಗೊಂಡವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಫಾತಿಮತ್ ಮಿಸ್ವಾನ ನೀಡಿದ ದೂರಿನನ್ವಯ ಸುದರ್ಶನ ಪೈ ಅವರನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ಸೆಪ್ಟೆಂಬರ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಮತ್ತೊಂದೆಡೆ, ಜನಸೇವಾ ಕೇಂದ್ರದ ಮಾಲಕಿ ಅಂಜನಾ ಎಸ್. ಪೈ (50) ನೀಡಿದ ಕೌಂಟರ್ ದೂರಿನ ಪ್ರಕಾರ, ಲ್ಯಾಮಿನೇಷನ್ ವೇಳೆ ದಾಖಲೆ ಹಾಳಾದ ಕಾರಣಕ್ಕೆ ಗಲಾಟೆ ನಡೆಸಿದ ಮಹಿಳೆ ಹಾಗೂ ಆಕೆಯ ಕಡೆಯವರು ₹10,000 ಪರಿಹಾರ ನೀಡಬೇಕೆಂದು ಪಟ್ಟು ಹಿಡಿದಿದ್ದರು. ವಿಷಯ ತಿಳಿದು ಸ್ಥಳಕ್ಕೆ ಬಂದ ಅಂಜನಾ ಪೈ ಅವರನ್ನು ಸಮಾಧಾನಪಡಿಸಲು ಯತ್ನಿಸಿದಾಗ, ವಿಡಿಯೋ ಚಿತ್ರೀಕರಣ ಮಾಡಲು ಯತ್ನಿಸಿ ಅವಾಚ್ಯವಾಗಿ ಬೈದು ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ್ದಾರೆ ಎನ್ನಲಾಗಿದೆ. ಈ ದೂರಿನನ್ವಯ ಪಾತಿಮಾತ್ ಮಿಸ್ವಾನ, ಮುಬಾಶಿರಾ, ಮುಬಾರಿಶ್ ಹಾಗೂ ನೌಶಾದ್ ವಿರುದ್ಧ ಪ್ರಕರಣ ದಾಖಲಾಗಿದೆ.
ಇದೇ ವೇಳೆ ದರ್ಬೆ ಜಂಕ್ಷನ್ ಬಳಿ ಸಾರ್ವಜನಿಕರು ಗುಂಪು ಸೇರಿ ಗಲಾಟೆ ಮಾಡುತ್ತಿರುವ ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಪುತ್ತೂರು ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಜಾನ್ಸನ್ ಡಿಸೋಜಾ ಮತ್ತು ಸಿಬ್ಬಂದಿ ಜನರನ್ನು ಚದುರಿಸಲು ಯತ್ನಿಸಿದ್ದಾರೆ. ಈ ವೇಳೆ ಗಲಾಟೆಗೆ ಸಂಬಂಧಿಸಿದವರನ್ನು ಠಾಣೆಗೆ ಕರೆದೊಯ್ಯುತ್ತಿದ್ದಾಗ ನಿಯಾಝ್, ನೌಶಾದ್ ಹಾಗೂ ಇತರರು ಪೊಲೀಸರ ಕರ್ತವ್ಯಕ್ಕೆ ತಡೆಯೊಡ್ಡಿ ಅಡ್ಡಿಪಡಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆಯೂ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.















