ಮುಲ್ಕಿ : ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ಪ್ರಸಿದ್ಧ ಆದಿ ಕಿಲ್ಲಾಡಿ ಕೊರ್ದಬ್ಬು ದೈವಸ್ಥಾನದ ಗರ್ಭಗುಡಿಯ ಬೀಗ ಮುರಿದು ದೈವದ ಮೂರ್ತಿ ಹಾಗೂ ಆಭರಣಗಳನ್ನು ಕಳವು ಮಾಡಿದ್ದ ಗ್ಯಾಂಗ್ ಒಂದನ್ನು ಪತ್ತೆಹಚ್ಚಿರುವ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 17.20 ಲಕ್ಷ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಗಳ ವಿವರ:
ಜಾಹೀದ್ ಸಿನಾನ್ (36) – ಹೆಚ್.ಕೆ. ಮಂಜಿಲ್, ಹೆಜಮಾಡಿ ಗ್ರಾಮ, ಉಡುಪಿ.
ಯಾಸೀನ್ (36) – ನಿಟ್ಟೆ, ಕಾರ್ಕಳ ತಾಲೂಕು, ಉಡುಪಿ.
ಮಹಮದ್ ಅಫ್ರಿದಿ (26) – ಗೋಕುಲನಗರ, ದಾವಣಗೆರೆ.
ಎಸ್.ಕೆ. ಅಬ್ದುಲ್ ಜುಮ್ಮಾನ್ (26) – ಜಾಲಿನಗರ, ದಾವಣಗೆರೆ
ಸೆಪ್ಟೆಂಬರ್ 1ರಂದು ಮಧ್ಯರಾತ್ರಿ ದೈವಸ್ಥಾನದ ಗರ್ಭಗುಡಿಯ ಮುಖ್ಯ ದ್ವಾರದ ಬೀಗ ತುಂಡರಿಸಿ ಕೊರ್ದಬ್ಬು ದೈವದ ಮೂರ್ತಿ ಹಾಗೂ ಚಿನ್ನಾಭರಣಗಳನ್ನು ದೋಚಲಾಗಿತ್ತು. ಈ ಬಗ್ಗೆ ಮುಲ್ಕಿ ಠಾಣೆಯಲ್ಲಿ (ಅ.ಕ್ರ 65/2026, ಬಿಎನ್ಎಸ್ ಕಾಯ್ದೆ) ಪ್ರಕರಣ ದಾಖಲಾಗಿತ್ತು. ಪ್ರಕರಣದ ಪತ್ತೆಗೆ ರಚಿಸಲಾಗಿದ್ದ ವಿಶೇಷ ಪೊಲೀಸ್ ಪಡೆ, ಸೆಪ್ಟೆಂಬರ್ 6ರಂದು ಮುಲ್ಕಿಯ ಕಾರ್ನಾಡು ಎಂಬಲ್ಲಿ ಜಾಹೀದ್ ಸಿನಾನ್ ಹಾಗೂ ಯಾಸೀನ್ನನ್ನು ವಶಕ್ಕೆ ಪಡೆದಿತ್ತು. ಬಳಿಕ ಇವರ ಸುಳಿವು ಆಧರಿಸಿ ಸೆಪ್ಟೆಂಬರ್ 7ರಂದು ದಾವಣಗೆರೆಯಲ್ಲಿ ಮಹಮದ್ ಅಫ್ರಿದಿ ಹಾಗೂ ಅಬ್ದುಲ್ ಜುಮ್ಮಾನ್ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆದ ಅಧಿಕಾರಿಗಳು, ಕಳವು ಮಾಡಲಾಗಿದ್ದ ಸುಮಾರು 4 ಕೆಜಿ 521 ಗ್ರಾಂ ತೂಕದ ಬೆಳ್ಳಿ ಹಾಗೂ 34.820 ಗ್ರಾಂ ತೂಕದ ಚಿನ್ನಾಭರಣಗಳು (ಅಂದಾಜು ಮೌಲ್ಯ ₹11.20 ಲಕ್ಷ) ಮತ್ತು ಕೃತ್ಯಕ್ಕೆ ಬಳಸಿದ್ದ ₹6 ಲಕ್ಷ ಮೌಲ್ಯದ ಕಾರು ಹಾಗೂ ಬೈಕ್ ಸೇರಿದಂತೆ ಒಟ್ಟು ₹17,20,000 ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಆರೋಪಿಗಳ ಬಂಧನದಿಂದಾಗಿ ಉಳ್ಳಾಲ ಠಾಣಾ ವ್ಯಾಪ್ತಿಯ ಕಲ್ಲಾಪು ಶ್ರೀ ಮಹಾಲಕ್ಷ್ಮೀ ಮಹಾಗಣಪತಿ ದೇವಸ್ಥಾನ ಹಾಗೂ ಉಡುಪಿ ಜಿಲ್ಲೆಯ ಪಡುಬಿದ್ರೆ ವ್ಯಾಪ್ತಿಯ ಇನ್ನಾ ಗ್ರಾಮದ ವ್ಯಾಘ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದಿದ್ದ ಕಳವು ಪ್ರಕರಣಗಳೂ (UDR/ಎಫ್ಐಆರ್) ಪತ್ತೆಯಾಗಿವೆ.
ಪ್ರಕರಣದ 1ನೇ ಆರೋಪಿ ಜಾಹೀದ್ ಸಿನಾನ್ ಹಳೆ ಖದೀಮನಾಗಿದ್ದು, ಈತನ ವಿರುದ್ಧ ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ದಾವಣಗೆರೆ ಹಾಗೂ ಮಂಗಳೂರು ನಗರದ ವಿವಿಧ ಠಾಣೆಗಳಲ್ಲಿ ಒಟ್ಟು 18 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಶ್ರೀಕಾಂತ್ ಕೆ. ನಿರ್ದೇಶನದಲ್ಲಿ ಸುರತ್ಕಲ್ ಇನ್ಸ್ಪೆಕ್ಟರ್ ಪ್ರಮೋದ್ ಕುಮಾರ್, ಮುಲ್ಕಿ ಪಿಎಸ್ಐ ರಾಘವೇಂದ್ರ ನಾಯಕ್ ಹಾಗೂ ಸಿಬ್ಬಂದಿ ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ.















