ಮಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ದಂಪತಿಯನ್ನು ಭೀಕರವಾಗಿ ಹತ್ಯೆಗೈದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.
2020ರ ಏಪ್ರಿಲ್ 29ರಂದು ಮುಲ್ಕಿ ತಾಲೂಕಿನ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಎಂಬಲ್ಲಿ ಈ ಭೀಕರ ಘಟನೆ ನಡೆದಿತ್ತು. ಮರದ ಗೆಲ್ಲು ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ನೆರೆಮನೆಯ ವಿನ್ಸೆಂಟ್ ಡಿ.ಸೋಜಾ (ವಿನ್ಸಿ) ಅವರೊಂದಿಗೆ ಆರೋಪಿ ಆಲ್ಫೋನ್ಸ್ ಸಲ್ದಾಣ ಗಲಾಟೆ ಮಾಡಿಕೊಂಡಿದ್ದನು. ಈ ವಿಚಾರವನ್ನು ರಾಜಿ ಪಂಚಾಯಿತಿ ಮಾಡುವ ನೆಪದಲ್ಲಿ ವಿನ್ಸೆಂಟ್ ಅವರನ್ನು ತನ್ನ ಮನೆಗೆ ಕರೆಸಿಕೊಂಡ ಆರೋಪಿ, ಚೂರಿಯಿಂದ ತಿವಿದು ಕೊಲೆ ಮಾಡಿದ್ದನು. ಪತಿಯನ್ನು ರಕ್ಷಿಸಲು ಧಾವಿಸಿ ಬಂದ ಪತ್ನಿ ಹೆಲೆನ್ ಡಿ.ಸೋಜಾ ಅವರನ್ನು ಅಟ್ಟಾಡಿಸಿಕೊಂಡು ಹೋಗಿ ಅಮಾನುಷವಾಗಿ ಚೂರಿಯಿಂದ ಇರಿದು ಕೊಲೆಗೈದಿದ್ದನು.
ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಪೊಲೀಸ್ ನಿರೀಕ್ಷಕ ಜಯರಾಮ ಡಿ. ಗೌಡ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜಗದೀಶ್ ಅವರು, ಜನವರಿ 19, 2026ರಂದು ಆರೋಪಿ ಆಲ್ಫೋನ್ಸ್ ಸಲ್ದಾಣ ತಪ್ಪಿತಸ್ಥ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದಾರೆ.
