ಉಸ್ತುವಾರಿ ಸಚಿವ ಯು.ಟಿ. ಖಾದರ್ ಹಾಗೂ ಪುತ್ತೂರು ಶಾಸಕ ಅಶೋಕ್ ರೈ ಅವರ ಪರಿಶ್ರಮದ ಫಲವಾಗಿ, ತುಳು ಭಾಷೆಗೆ ಸರ್ಕಾರದಿಂದ ಮಾನ್ಯತೆ ದೊರೆತಿದೆ . ತುಳುನಾಡಿನ ಜನರ ಬಹುದಿನಗಳ ಬೇಡಿಕೆಯಾಗಿದ್ದ ತುಳು ಭಾಷೆಯ ಮಾನ್ಯತೆ ವಿಚಾರದಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ತುಳು ಭಾಷೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ಮಾನ್ಯತೆ ಮಹತ್ವದ ಬೆಳವಣಿಗೆಯಾಗಿದೆ.
ಈ ವಿಚಾರ ತುಳು ಭಾಷಿಕರಲ್ಲಿ ಸಂತಸ ಮೂಡಿಸಿದ್ದು, ಸಚಿವ ಯು.ಟಿ. ಖಾದರ್ ಹಾಗೂ ಶಾಸಕ ಅಶೋಕ್ ರೈ ಅವರ ಪ್ರಯತ್ನಕ್ಕೆ ಅಭಿನಂದನೆಗಳು ವ್ಯಕ್ತವಾಗುತ್ತಿವೆ.

ಮಂಗಳೂರಿನ ಪಡೀಲ್ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಪ್ರಜಾಸೌಧ’ದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಅನ್ವಯವಾಗುವಂತೆ ತುಳು ಭಾಷೆಯನ್ನು ಎರಡನೇ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆಯಾಗಿ ಘೋಷಿಸಲು ಸಂಪುಟ ಅನುಮೋದನೆ ನೀಡಿದೆ.
ಕನ್ನಡವು ಎಂದಿನಂತೆ ರಾಜ್ಯದ ಮೊದಲ ಅಧಿಕೃತ ಆಡಳಿತ ಭಾಷೆಯಾಗಿ ಮುಂದುವರಿಯಲಿದೆ.
2000 ವರ್ಷಕ್ಕೂ ಅಧಿಕ ಇತಿಹಾಸವಿರುವ ಹಾಗೂ ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳುವಿಗೆ ಸಿಕ್ಕಿರುವ ಈ ಮಾನ್ಯತೆ, ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳುವನ್ನು ಸೇರಿಸುವ ಮುಂದಿನ ಹೋರಾಟಕ್ಕೂ ಮಹತ್ವದ ಬಲ ತುಂಬಲಿದೆ.

ತುಳು ಕೇವಲ ಒಂದು ಭಾಷೆಯಲ್ಲ. ಅದು ತುಳುನಾಡಿನ ಜನರ ಅಸ್ಮಿತೆ, ಆತ್ಮಗೌರವ, ಸಂಸ್ಕೃತಿ, ಪರಂಪರೆ ಮತ್ತು ಬದುಕಿನ ಅವಿಭಾಜ್ಯ ಅಂಗವಾಗಿದೆ. ಶತಮಾನಗಳಿಂದ ಜನರ ನಿತ್ಯ ಜೀವನದಲ್ಲಿ ಜೀವಂತವಾಗಿರುವ ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರೆಯಬೇಕು ಎಂಬುದು ತುಳುವರ ಬಹುಕಾಲದ ಕನಸಾಗಿತ್ತು. ಇದೀಗ ಆ ಕನಸಿಗೆ ಸರ್ಕಾರದ ನಿರ್ಧಾರದ ಮೂಲಕ ಮಹತ್ವದ ಸ್ಪಂದನೆ ದೊರೆತಿರುವುದು ಸಂತಸದ ಸಂಗತಿ. ಇದಕ್ಕೆ ಶ್ರಮಿಸಿದ ಸಚಿವ ಯು.ಟಿ ಖಾದರ್ ಮತ್ತು ಶಾಸಕ ಅಶೋಕ್ ಕುಮಾರ್ ರೈಯವರಿಗೆ ತುಳುನಾಡಿನ ಸಮಸ್ತ ಜನತೆ ಕೃತಜ್ಞತೆ ಸಲ್ಲಿಸಿದ್ದಾರೆ.















