ಮಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂಕುಸಿತದ ಅಪಾಯ ಮತ್ತಷ್ಟು ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಡಳಿತವು ಜಿಲ್ಲೆಯ 88 ಪ್ರದೇಶಗಳನ್ನು ಭೂಕುಸಿತ ಸಂಭವಿಸುವ ಅತಿ ಹೆಚ್ಚು ಅಪಾಯದ ವಲಯಗಳಾಗಿ (Danger Zone) ಗುರುತಿಸಿದ್ದು, ಸಾರ್ವಜನಿಕರು ಮಳೆಗಾಲದಲ್ಲಿ ಅತ್ಯಂತ ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಿದೆ.
ಅಧಿಕೃತ ಮಾಹಿತಿಯಂತೆ, ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ಪ್ರಕರಣಗಳಲ್ಲಿ 17 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಸಕ್ತ ವರ್ಷದಲ್ಲಿಯೂ ಈಗಾಗಲೇ ಮೂರು ಮಂದಿ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಅಪಾಯದ ಪಟ್ಟಿಯಲ್ಲಿ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್, ನೆರಿಯ, ಶಿಶಿಲ, ಮಂಗಳೂರು ಸಮೀಪದ ಕೆತ್ತಿಕಲ್, ಹಾಗೆಯೇ ಬಂಟ್ವಾಳ, ಪುತ್ತೂರು, ಸುಳ್ಯ, ಕಡಬ ಹಾಗೂ ಉಳ್ಳಾಲವ್ಯಾಪ್ತಿಯ ಹಲವು ಪ್ರದೇಶಗಳು ಸೇರಿವೆ.
ಭೂಕುಸಿತದ ಅಪಾಯವನ್ನು ಅಧ್ಯಯನ ಮಾಡಲು ಐಐಟಿ ಧಾರವಾಡ ನಡೆಸಿದ ವೈಜ್ಞಾನಿಕ ಸಂಶೋಧನೆ ಹಾಗೂ ಕೃತಕ ಬುದ್ಧಿಮತ್ತೆ (AI) ಆಧಾರಿತ ವಿಶ್ಲೇಷಣೆಯ ವರದಿ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯ ಶೇ.24ಕ್ಕೂ ಹೆಚ್ಚು ಭೂಭಾಗ ಭೂಕುಸಿತಕ್ಕೆ ಸೂಕ್ಷ್ಮ ಪ್ರದೇಶವಾಗಿದೆ. ತಜ್ಞರ ಅಭಿಪ್ರಾಯದಂತೆ, ಗುಡ್ಡ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ನಿರ್ಮಾಣ ಚಟುವಟಿಕೆಗಳು, ಅಕ್ರಮ ಗುಡ್ಡ ಕಟಾವು ಮತ್ತು ನಿರಂತರ ಮಳೆಯ ಪರಿಣಾಮವಾಗಿ ಭೂಕುಸಿತದ ಸಾಧ್ಯತೆ ಹೆಚ್ಚುತ್ತಿದೆ.
ಸಂಭವನೀಯ ಅನಾಹುತಗಳನ್ನು ಎದುರಿಸಲು ಜಿಲ್ಲಾಡಳಿತವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲಾದ್ಯಂತ 115 ಪರಿಹಾರ ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದ್ದು, ಅಗತ್ಯಬಿದ್ದರೆ ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳನ್ನು ನಿಯೋಜಿಸುವ ವ್ಯವಸ್ಥೆಯೂ ಮಾಡಲಾಗಿದೆ.
ಅಪಾಯದ ಪ್ರದೇಶಗಳಲ್ಲಿ ವಾಸಿಸುವ ನಿವಾಸಿಗಳು ಅಧಿಕಾರಿಗಳ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಸ್ಥಳಾಂತರಕ್ಕೆ ಸೂಚನೆ ಬಂದಲ್ಲಿ ಯಾವುದೇ ವಿಳಂಬ ಮಾಡದೆ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ತಿಳಿಸಲಾಗಿದೆ. ಮಳೆಗಾಲದಲ್ಲಿ ಭೂಕುಸಿತದ ಎಚ್ಚರಿಕೆಗಳನ್ನು ನಿರ್ಲಕ್ಷಿಸದೆ ಮುನ್ನೆಚ್ಚರಿಕೆ ವಹಿಸುವುದೇ ಜೀವ ರಕ್ಷಣೆಗೆ ಅತ್ಯಂತ ಮುಖ್ಯ ಎಂದು ಆಡಳಿತ ಸ್ಪಷ್ಟಪಡಿಸಿದೆ.
