ದೇಶದ ಸಾರ್ವಭೌಮತ್ವ ಮತ್ತು ಭದ್ರತೆಗೆ ಧಕ್ಕೆ ತರಲು ಸಂಚು ರೂಪಿಸಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಬುಧವಾರ ಮಹತ್ವದ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಕರ್ನಾಟಕದ ಗಣಿ ನಾಡು ಬಳ್ಳಾರಿಯಲ್ಲಿಯೂ ಮುಂಜಾನೆಯೇ ಎನ್ಐಎ ಅಧಿಕಾರಿಗಳ ತಂಡ ದಾಳಿ ನಡೆಸಿ, ತೀವ್ರ ಶೋಧ ಕಾರ್ಯದಲ್ಲಿ ತೊಡಗಿದೆ.
ದೇಶಾದ್ಯಂತ ಪ್ರಮುಖ ನಗರಗಳು ಮತ್ತು ಆಯಕಟ್ಟಿನ ಸ್ಥಳಗಳಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಹಾಗೂ ಸಾರ್ವಜನಿಕರಲ್ಲಿ ಭೀತಿ ಮೂಡಿಸಲು ಉಗ್ರ ಸಂಘಟನೆಗಳ ಬೆಂಬಲದೊಂದಿಗೆ ಸಂಚು ರೂಪಿಸಲಾಗಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ನೆಟ್ವರ್ಕ್ ಬೆನ್ನತ್ತಿರುವ ಎನ್ಐಎ ಅಧಿಕಾರಿಗಳು, ದೇಶದ ಹಲವು ರಾಜ್ಯಗಳ ವಿವಿಧ ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಉಗ್ರ ಲಿಂಕ್ಗಳ ಪತ್ತೆಗೆ ಮುಂದಾಗಿದ್ದಾರೆ.
ಬಳ್ಳಾರಿ ನಗರದ ಕೌಲ್ ಬಜಾರ್ ನಿವಾಸಿಯಾದ ಅಬ್ದುಲ್ ನಜೀರ್ ಎಂಬಾತನ ಮನೆಗೆ ಮುಂಜಾನೆಯೇ ಲಗ್ಗೆ ಇಟ್ಟಿರುವ ಅಧಿಕಾರಿಗಳ ತಂಡ, ಪ್ರಸ್ತುತ ಜಾಲದ ತನಿಖೆ ನಡೆಸುತ್ತಿದೆ. ಸ್ಥಳೀಯ ಪೊಲೀಸರ ಬಿಗಿ ಭದ್ರತೆಯೊಂದಿಗೆ ಅಬ್ದುಲ್ ನಜೀರ್ ಮನೆಗೆ ಪ್ರವೇಶಿಸಿರುವ ಅಧಿಕಾರಿಗಳು, ಮನೆಯ ಪ್ರತಿಯೊಂದು ಕೋಣೆಯನ್ನು ಜಾಲಾಡುತ್ತಿದ್ದಾರೆ. ಡಿಜಿಟಲ್ ಪುರಾವೆಗಳು, ಬ್ಯಾಂಕ್ ಖಾತೆಗಳ ವಿವರ ಮತ್ತು ಸಂಶಯಾಸ್ಪದ ದಾಖಲೆಗಳಿಗಾಗಿ ತಲಾಷ್ ನಡೆಸಲಾಗುತ್ತಿದೆ.
ಮೂಲಗಳ ಪ್ರಕಾರ, ಈ ಹಿಂದೆ ನೆರೆರಾಜ್ಯ ತೆಲಂಗಾಣದ ಹೈದರಾಬಾದ್ನಲ್ಲಿ ಅಬ್ದುಲ್ ನಜೀರ್ ವಿರುದ್ಧ ವಿಧ್ವಂಸಕ ಕೃತ್ಯಗಳ ಸಂಚು ಹಾಗೂ ದೇಶವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಗಂಭೀರ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಲಿಂಕ್ ಆಧರಿಸಿಯೇ ಎನ್ಐಎ ಅಧಿಕಾರಿಗಳು ಬಳ್ಳಾರಿಯ ಆತನ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಹೈದರಾಬಾದ್ ಹಾಗೂ ಬಳ್ಳಾರಿಯ ನಡುವಿನ ಸಂಪರ್ಕದ ನೆಟ್ವರ್ಕ್ ಮುರಿಯಲು ಈ ಕಾರ್ಯಾಚರಣೆ ಪ್ರಮುಖವಾಗಿದೆ ಎನ್ನಲಾಗಿದೆ.
ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಅಬ್ದುಲ್ ನಜೀರ್ ನಿವಾಸದ ಸುತ್ತಮುತ್ತ ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಅಬ್ದುಲ್ ನಜೀರ್ ವಿದೇಶಿ ಮೂಲದ ಉಗ್ರ ಸಂಘಟನೆಗಳು ಹಾಗೂ ದೇಶದೊಳಗಿನ ಸ್ಲೀಪರ್ ಸೆಲ್ಗಳೊಂದಿಗೆ ಸಂಪರ್ಕದಲ್ಲಿದ್ದನೇ? ಕೃತ್ಯಗಳಿಗೆ ಯಾವುದೇ ರೀತಿಯ ಆರ್ಥಿಕ ನೆರವು (ಟೆರರ್ ಫಂಡಿಂಗ್) ಹರಿದುಬಂದಿದೆಯೇ? ಎಂಬಿತ್ಯಾದಿ ಆಯಾಮಗಳಲ್ಲಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ತನಿಖೆಯ ಪೂರ್ಣ ವಿವರಗಳು ಸದ್ಯದಲ್ಲೇ ಹೊರಬೀಳಬೇಕಿದೆ.
