ನವದೆಹಲಿ: ಶಿಕ್ಷಣ ಮತ್ತು ಯುವ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸೋಮವಾರ ಹಮ್ಮಿಕೊಂಡಿದ್ದ ‘ಚಲೋ ಸಂಸದ್’ ಪಾದಯಾತ್ರೆಯು ಜಂತರ್ ಮಂತರ್ ಬಳಿ ತೀವ್ರ ಉದ್ವಿಗ್ನತೆಗೆ ಕಾರಣವಾಯಿತು. ನೂರಾರು ವಿದ್ಯಾರ್ಥಿಗಳು ಮತ್ತು ಯುವ ಕಾರ್ಯಕರ್ತರು ಸಂಸತ್ತಿನತ್ತ ಮುನ್ನಡೆಯಲು ಯತ್ನಿಸಿದಾಗ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ಈ ವೇಳೆ ಕೆಲವು ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದರು.
ಕೇರಳ ಹೌಸ್ ಪ್ರವೇಶ ಮತ್ತು ನಿರ್ಗಮನ ದ್ವಾರದ ಬಳಿ ಪೊಲೀಸರು ಬ್ಯಾರಿಕೇಡ್ಗಳನ್ನು ಹಾಕಿ ಪ್ರತಿಭಟನಾಕಾರರನ್ನು ತಡೆದಾಗ ಭದ್ರತಾ ಸಿಬ್ಬಂದಿ ಹಾಗೂ ಮುಖಂಡರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ದೆಹಲಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ಕೇಂದ್ರ ಸರ್ಕಾರವು ಯುವಕರು ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿ ಸಿಜೆಪಿ ಈ ಪ್ರತಿಭಟನೆಯನ್ನು ಆಯೋಜಿಸಿತ್ತು. ಕಳೆದ ಕೆಲವು ವಾರಗಳಿಂದ ಜಂತರ್ ಮಂತರ್ನಲ್ಲಿ ಶಾಂತಿಯುತ ಧರಣಿ ನಡೆಸುತ್ತಿದ್ದ ಪಕ್ಷವು, ಸಂಸದರ ಗಮನ ಸೆಳೆಯಲು ಸೋಮವಾರ ಬೃಹತ್ ಮಾರ್ಚ್ ಹಮ್ಮಿಕೊಂಡಿತ್ತು. ಪ್ರತಿಭಟನೆ ಹತೋಟಿ ಮೀರದಂತೆ ತಡೆಯಲು ಅಧಿಕಾರಿಗಳು ಕೇಂದ್ರ ದೆಹಲಿಯ ಕೆಲವು ಆಯ್ದ ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.
ಮತ್ತೊಂದೆಡೆ, ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ದಾಖಲಾಗಿ ವೈದ್ಯಕೀಯ ನಿಗಾದಲ್ಲಿರುವ ಹವಾಮಾನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ಆಸ್ಪತ್ರೆಯಿಂದಲೇ ಯುವ ಪ್ರತಿಭಟನಾಕಾರರಿಗೆ ಶುಭ ಹಾರೈಸಿದ್ದಾರೆ. ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಉಪವಾಸ ಸತ್ಯಾಗ್ರಹವನ್ನು ಮುಂದುವರಿಸಿದ್ದಾರೆ ಎಂದು ಸಿಜೆಪಿ ವಕ್ತಾರ ಸೌರವ್ ದಾಸ್ ತಿಳಿಸಿದ್ದಾರೆ. ಇದೇ ವೇಳೆ, ಪ್ರತಿಭಟನಾಕಾರರು ಶಾಂತಿ ಕಾಪಾಡಬೇಕು ಮತ್ತು ಚಳವಳಿಯ ಮೂಲ ಉದ್ದೇಶಗಳ ಕಡೆಗೆ ಗಮನ ಹರಿಸಬೇಕು ಎಂದು ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಆಂಗ್ಮೋ ಮನವಿ ಮಾಡಿದ್ದಾರೆ.
